Wednesday, December 10, 2008

ಹರೆ ಕೃಷ್ಣಾ ಹರೆ ರಾಮ

ಆತನ ಈಗಿನ ಹೆಸರು ಕುಲಶೇಖರ. ವಯಸ್ಸು ಇಪ್ಪತ್ತೈದು ಇಪ್ಪತ್ತಾರು ಇರಬಹುದು. ಇಸ್ಕಾನ್ ನ ಸನ್ಯಾಸಿ ಆತ. ಆತ ಓದಿದ್ದು ಡೆಂಟಲ್ . ಕೋರ್ಸ್ ಮುಗಿಯುತ್ತಿದ್ದಂತೆ ಆಧ್ಯಾತ್ಮದ ಕಡೆ ಎಳೆಯಿತಂತೆ ಹಾಗಾಗಿ ಆತ ಇಸ್ಕಾನ್ ಸೇರಿಕೊಂಡ. ತಂದೆತಾಯಿಗೆ ಒಬ್ಬನೇ ಮಗನಾದ ಆತನಿಗೆ ಮನೆಯಿಂದ ಇಸ್ಕಾನ್ ಸೇರಬೇಡ ಎಂಬ ಒತ್ತಡ ಮನವಿ ಬಹಳ ಇತ್ತಂತೆ. ಆದರೆ ಆತನಿಗೆ ಇಹದ ಬಗ್ಗೆ ಆಸಕ್ತಿಯೇ ಇರಲಿಲ್ಲ. ಎಲ್ಲವನ್ನೂ ಬಿಟ್ಟು "ಹರೆ ಕಿಷನಾ.. ಹರೆ ರಾಮ ಕಿಷ್ನ ಕಿಷ್ನ ಹರೆ. ಹರೇ..." ತುಂಬಾ ಇಷ್ಟವಾಯಿತು. ಎರಡೂ ಕೈಗಳನ್ನು ಮೇಲಕ್ಕೆತ್ತಿ ಕುಣಿಯುತ್ತಾ ಭಜನೆ ಮಾಡುತ್ತಾ ಮನಸ್ಸಿನಲ್ಲಿ ಕೃಷ್ಣನನ್ನು ಆಹ್ವಾನಿಸಿಕೊಳ್ಳುವ ಆ ಮಜ ನಮ್ಮ ಕುಲಶೇಖರಿನಿಗೆ ತಾನು ಓದಿದ್ದ ಎಂ.ಬಿ.ಬಿ.ಎಸ್ ನ್ನೂ ಮರೆಸುವ ತಾಕತ್ತು ಇತ್ತು. ಹಾಗಾಗಿ ಆತ ಇಸ್ಕಾನಿ. ನನಗೆ ಆತ ಒಂದು ಟ್ರೈನಿಂಗ್ ಪ್ರೋಗ್ರಾಂ ನಲ್ಲಿ ಸಿಕ್ಕಿದ್ದ. ನೋಡಲು ಮುದ್ದುಮುದ್ದಾಗಿದ್ದ ಆತ ಎಂತಹವರನ್ನೂ ಸೆಳೆಯುವ ಮುಖಾರವಿಂದ ಹೊಂದಿದ್ದ. ಆದರೆ ಸುಮ್ಮಸುಮ್ಮನೆ ಮಾತನಾಡಲಾರ. ಮೂರುದಿನದ ಕೃಷಿ ಟ್ರೈನಿಂಗ್ ನಲ್ಲಿ ಎರಡು ದಿನ ಆತನೊಟ್ಟಿಗೆ ಮುಗುಳ್ನಗೆಯ ವಿನಿಮಯದೊಂದಿಗೆ ಕಳೆದೆ. ನನಗೋ ಆತನೊಡನೆ ಮಾತನಾಡುವ ಹಂಬಲ. ಆದರೆ ಆತನಿಗೆ ಇಹದ ಬಗ್ಗೆ ಆಸಕ್ತಿಯೇ ಇಲ್ಲ ಯಾವಾಗಲೂ ಕೈಯಲ್ಲಿ ಜಪಮಣಿ ಬಾಯಲ್ಲಿ ಕೃಷ್ಣ ಕೃಷ್ಣ ಮಿಣಿಮಿಣಿ. ಅಂತೂ ಇಂತು ಎರಡು ದಿನದ ಮುಗಳ್ನಗು ಮೂರನೆಯ ದಿನ ಪ್ರಯೋಜನಕ್ಕೆ ಬಂದಿತ್ತು. ಬೆಳಿಗ್ಗೆ ತಿಂಡಿಯ ಸಮಯದಲ್ಲಿ ಆತ ವರಾಂಡದಲ್ಲಿ ಅಡ್ದಾಡುತ್ತಿದ್ದ. ತಿಂಡಿ ತಿನ್ನುತ್ತಿದ್ದ ನನಗೆ ನೀರಿನ ಅವಶ್ಯಕತೆ ಇತ್ತು. ಆದರೆ ಒಂದು ಕೈಯಲ್ಲಿ ಬಟ್ಟಲು ಇರುವ ಕಾರಣ ನಲ್ಲಿ ತಿರುಪದಾದೆ. ಆಗ ಆತ ಸಹಾಯಕ್ಕೆ ಬಂದ. ನೀರು ಲೋಟ ತುಂಬಿದ ನಂತರ ತ್ಯಾಂಕ್ಸ್ ಎಂದೆ ಆತ ಕೃಷ್ಣಾರ್ಪಣ ಎಂದ. ನನಗೆ ಆತನ ಕೃಷ್ಣ ಭಕ್ತಿಯನ್ನು ಕಂಡು ಅಚ್ಚರಿಯಾಯಿಯಿತು. ಹಗೂರ ಮಾತಿಗೆಳೆದ. ಪೂರ್ವಾಶ್ರಮದ ಬಗ್ಗೆ ಚುಟುಕಾಗಿ ಮುಗಿಸಿ ಅದರ ಬಗ್ಗೆ ಕೇಳಬೇಡಿ ಎಂದ. ನಿಮಗೆ ತಿಂಡಿ ಆಯಿತಾ ಎಂದೆ. ಇಲ್ಲ ಕೃಷ್ಣಾರ್ಪಣವಾದ ಮೇಲೆ ಕೃಷ್ಣನಿಗೆ ನೈವೇದ್ಯವಾದ ಮೇಲೆ ನಮಗೆ ಆಹಾರ ಎಂದ ಆತ. ಹಸಿವೆ ಯಾವ್ಗುವುದಿಲ್ಲವೇ? ಎಂದೆ. ಆ ಪರಮಾತ್ಮ ಕೃಷ್ಣನ ಆಸೆ ಹಾಗಿದ್ದರೆ ಹಾಗೆಯೇ ಆಗಲಿ ಎಂದ. ಮತ್ತೆ ಜಪಮಣಿ ತಿರುವುತ್ತಾ ಮಿಣ ಮಿಣ ಮುಂದುವರೆಸಿದ. ನನಗೆ ಆಯಾಚಿತವಾಗಿ ಪ್ರಶ್ನೆಯೊಂದು ಅಕಸ್ಮಾತ್ ಕೇಳಿ ಹೋಯಿತು. " ಈ ಕಾಲದಲ್ಲಿಯೂ ಕೃಷ್ಣ ಅಂತ ಒಬ್ಬ ಇದ್ದಾನೆ ಆತ ದೇವರು ಅವನು ಇಲ್ಲೆಲ್ಲೋ ನಿಂತು ನಿಮ್ಮನ್ನು ನೋಡುತ್ತಿದ್ದಾನೆ, ನಿಮ್ಮ ಆಶಯ ಈಡೇರಿಸುತ್ತಾನೆ ಎಂಬ ನಂಬಿಕೆ ನಿಮ್ಮಲ್ಲಿದೆಯಾ?" ಒಮ್ಮೆ ಆತನ ಮುಖ ಗಂಭೀರವಾಯಿತು. ಎರಡೂ ಕಣ್ಣಿನಿಂದ ದಳದಳ ನೀರಿಳಿಯಿತು. ಕಿವಿಯನ್ನು ಮುಚ್ಚಿಕೊಂಡು " ಹೇ ಪರಮಾತ್ಮ ಇಂತಹಾ ವಾಕ್ಯಗಲನ್ನು ನನ್ನ ಈ ಕಿವಿಗಳು ಕೇಳಬೇಕಾಯಿತಲ್ಲ " ಎಂದು ಹೇಳಿ ಮೌನವಾದ. ನಂತರ ನನಗೆ ಆ ಪ್ರಶ್ನೆ ಕೇಳಬಾರದಿತ್ತು ಅಂತ ಅನ್ನಿಸಿತು. ಆದರೆ ಕಾಲ ಮಿಂಚಿಹೋಗಿತ್ತು. ಕ್ಷಮಿಸಿ ನಿಮಗೆ ಈ ಪ್ರಶ್ನೆ ಕೇಳಿದ್ದಕ್ಕೆ ಎಂದೆ. ಮರುಕ್ಷಣ ಆತ" ಛೆ ಪರವಾಗಿಲ್ಲ, ಇದೂ ಕೂಡ ಆ ಪರಮಾತ್ಮನ ಪರೀಕ್ಷೆ, ಇದರ ಅರ್ಥ ನಾನು ಇನ್ನೂ ಆಧ್ಯಾತ್ಮಿಕ ಸಾಧನೆ ಮಾಡಬೇಕಿದೆ ಎಂದು ಮಿಣಮಿಣ ಮುಂದುವರೆಸಿದ,

ಇಂತಹ ಒಂದು ಪರಮ ಭಕ್ತಿಯ ಜನರನ್ನು ಇಲ್ಲಿಯವರೆಗೆ ನಾನು ನೊಡಿರಲೇ ಇಲ್ಲ. ನನಗೂ ಆಸೆಯಾಗುತ್ತದೆ. ಅಂತಹ ನಿರ್ಮಲ ನಿಸ್ವಾರ್ಥ ಭಕ್ತಿಯನ್ನು ಅನುಭವಿಸಬೇಕು. ಅದರಲ್ಲಿ ಅಂತಹ ಮಜ ಇದೆ ಎಂದು ಅನ್ನಿಸುತ್ತದೆ. ಮರುಕ್ಷಣ ನನ್ನಂತಹ ಮನುಷ್ಯನಿಗೆ ಅದು ಆಗದು ಎಂದು ಅನ್ನಿಸಲು ಶುರುವಾಗಿಬಿಡುತ್ತದೆ. ನಂಬಿಕೆಟ್ಟವರಿಲ್ಲವೋ ಅಂಬುದು ನಿಜ ಆದರೆ ನಂಬಲು ಆಗದಲ್ಲ ಅದು ಬಹಳ ಕಷ್ಟ. ನಂಬಲೇಬೇಕು ಎಂದು ಹೊರಟಾಗಲೆಲ್ಲ ಸಾವಿರ ಸಾವಿರ ತರ್ಕ ಕುತರ್ಕದ ಪ್ರಶ್ನೆಗಳು ಮೂಡಿ ಯಡವಟ್ಟಾಗಿಬಿಡುತ್ತದೆ.

1 comment:

Harisha - ಹರೀಶ said...

ವಿಚಿತ್ರವಾಗಿದೆ!! ಇಂಥವರೂ ಇದ್ದಾರಾ?